ನವದೆಹಲಿ, ಜ 10 (DaijiworldNews/DB): ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲನ ನ್ಯಾಯಾಂಗ ಬಂಧನವನ್ನು ಮುಂದಿನ 14 ದಿನಗಳವರೆಗೆ ವಿಸ್ತರಿಸಿ ದೆಹಲಿಯ ಸಾಕೇತ್ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
ಅಫ್ತಾಬ್ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆತನನ್ನು ಇಂದು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆತನ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿತು.
ಇನ್ನು ಅಧ್ಯಯನಕ್ಕಾಗಿ ಕೆಲವು ಕಾನೂನು ಪುಸ್ತಕಗಳನ್ನು ಆತ ಕೋರಿರುವುದಾಗಿ ನ್ಯಾಯಾಲಯ ಹೇಳಿದೆ. ಆತನಿಗೆ ಬೆಚ್ಚಗಿನ ಬಟ್ಟೆಗಳನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಕಳೆದ ಕೆಲವು ತಿಂಗಳುಗಳ ಹಿಂದೆ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್ಳನ್ನು ಈತ ಭೀಕರವಾಗಿ ಹತ್ಯೆಗೈದಿದ್ದ. ಅಲ್ಲದೆ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಪ್ರತಿದಿನ ದೆಹಲಿಯ ಅರಣ್ಯದಲ್ಲಿ ಒಂದೊಂದೇ ತುಂಡುಗಳನ್ನು ಎಸೆದಿದ್ದ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.