ಬೆಂಗಳೂರು, ಜ 11 (DaijiworldNews/SM): ರಾಜ್ಯ ವಿಧಾನಸಭೆಗೆ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗುತ್ತಿದೆ. ಈ ನಡುವೆ ಚುನಾವಣೆ ಗೆಲ್ಲುವುದಕ್ಕೂ ಕಸರತ್ತು ಶುರುವಾಗಿದೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ಪ್ರಣಾಳಿಕೆಗಳನ್ನು ಹೊರಡಿಸುತ್ತಿದ್ದು, ಇದೀಗ ಕಾಂಗ್ರೆಸ್ ಉಚಿತ ವಿದ್ಯುತ್ ವಿತರಿಸುವ ಭರವಸೆ ನೀಡಿದೆ.
ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದ್ದು, ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ. ಚಿಕ್ಕೋಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಹದಗೆಟ್ಟ ಹಣದುಬ್ಬರದಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿಗೆ ಬೆಳಕು ನೀಡಲು ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ ನೀಡಲಿದೆ ಎಂದು ಭರವಸೆ ನೀಡಿದರು.
ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ, ನಂತರ ವಿವಿಧ ಹಗರಣಗಳಲ್ಲಿ ಭಾಗಿಯಾಗಿರುವ ತನ್ನ ಸಚಿವರಿಗೆ ಕ್ಲೀನ್ ಚಿಟ್ ನೀಡುವ ಮೂಲಕ `ಬಿ-ರಿಪೋರ್ಟ್' ಸರ್ಕಾರವಾಯಿತು ಎಂದು ಆರೋಪಿಸಿದರು. ಅಲ್ಲದೆ ಪ್ರಸ್ತುತ ಇರುವ ಸರಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಲೇವಡಿ ಮಾಡಿದರು.