ಬೆಂಗಳೂರು, ಜ 12 (DaijiworldNews/SM): ಇತ್ತೀಚಿಗಷ್ಟೇ ಆಡಳಿತರೂಢ ಬಿಜೆಪಿಗೆ ಸೆಡ್ಡು ಹೊಡೆದು ಹೊಸ ರಾಜಕೀಯ ಪಕ್ಷ ಘೋಷಿಸಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಹೈಕೋರ್ಟ್ ಚಾಟಿಯ ಬೆನ್ನಲ್ಲೇ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ.
ಕಳೆದ ಮಂಗಳವಾರ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಗೃಹ ಇಲಾಖೆ, ಸಿಬಿಐಗೆ ಅನುಮತಿ ನೀಡಿ ಆದೇಶ ನೀಡಿದೆ.
ಹೈಕೋರ್ಟ್ ಗೆ ಮಾಹಿತಿ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗೃಹ ಇಲಾಖೆಯಿಂದ ಸಿಬಿಐಗೆ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.
ಬಳಿಕ ಹೈಕೋರ್ಟ್, ತಕ್ಷಣವೇ ಸಿಬಿಐ ತನ್ನ ಪ್ರಕ್ರಿಯೆ ಮುಂದುವರಿಸಬೇಕು. ರೆಡ್ಡಿ ಅವರ ಆಪ್ತಿ ಜಪ್ತಿಗೆ ಕ್ರಮ ತೆಗೆದುಕೊಳ್ಳಿ ಎಂದು ಸಿಬಿಐಗೆ ಆದೇಶಿಸಿದೆ.