ಬೆಂಗಳೂರು, ಜ 13 ( DaijiworldNews/MS): ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ಮೆಟ್ರೊ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಪಿಲ್ಲರ್ ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ್ದು ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿನ ಸುದ್ದಿ ಪರಿಗಣಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಆದೇಶಿಸಿದೆ.
ಈ ಕುರಿತು ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆಯೇ, ಹೊಣೆಗಾರಿಕೆ ನಿಗದಿಪಡಿಸಲಾಗಿದೆಯೇ, ರಸ್ತೆ ಮತ್ತು ಮೆಟ್ರೊ ಕಾಮಗಾರಿ ನಿಭಾಯಿಸುತ್ತಿರುವ ಅಧಿಕಾರಿಗಳ ಜವಾಬ್ದಾರಿ ಮತ್ತಿತರ ವಿಚಾರಗಳ ಕುರಿತು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ನೇತೃತ್ವದ ಪೀಠ ಮಾಹಿತಿ ಕೇಳಿದೆ
ಬೆಂಗಳೂರಿನ ರಸ್ತೆ ಮತ್ತು ನಿರ್ಮಾಣ ಕಾಮಗಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಬಿಬಿಎಂಪಿ, ಬಿಎಂಆರ್ಸಿಎಲ್, ಗುತ್ತಿಗೆದಾರರು ಹಾಗೂ ಈ ವಿಚಾರದಲ್ಲಿ ಸಂಬಂಧಿತರನ್ನು ಪ್ರತಿವಾದಿಗಳನ್ನಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ರಿಜಿಸ್ಟ್ರಾರ್ ಜನರಲ್ಗೆ ಪೀಠ ಆದೇಶಿಸಿದೆ.