ಚಿಕ್ಕಮಗಳೂರು, ಜ 15 (DaijiworldNews/DB): ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ.
ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಕೂಡಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದ ಶನಿವಾರ ಆಕೆ ಸಾವನ್ನಪ್ಪಿದ್ದಾಳೆ.
ಇನ್ನು ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತ ನಿತೇಶ್ (25) ವಿರುದ್ದ ಪ್ರೀತಿಸಿ ವಂಚಿಸಿರುವ ಮತ್ತು ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೂ ಮುನ್ನ ಆಕೆ ಡೆತ್ನೋಟ್ ಬರೆದಿದ್ದು, ಇದರಲ್ಲಿ ನಿತೇಶ್ ಮತ್ತು ತಾನು ಪ್ರೀತಿಸುತ್ತಿದ್ದು, ಇಬ್ಬರ ನಡುವಿನ ಗಲಾಟೆಯಿಂದಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಉಲ್ಲೇಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಮೃತ ಯುವತಿ ಪೋಷಕರು ನಿತೇಶ್ ವಿರುದ್ದ ದೂರು ನೀಡಿದ್ದಾರೆ. ಆದರೆ ಕುದುರೆಮುಖ ಪೊಲೀಸರು ದೂರು ದಾಖಲಿಸದೇ ಸತಾಯಿಸುತ್ತಿದ್ದಾರೆಂಬ ಆರೋಪವೂ ಕೇಳಿ ಬಂದಿದೆ.
ದೂರು ಸ್ವೀಕರಿಸಲು ಕುದುರೆಮುಖ ಪೊಲೀಸರು ಹಿಂದೇಟು ಹಾಕಿದ್ದು, ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಸೂಚನೆ ಮೇರೆಗೆ ದೂರು ಸ್ವೀಕರಿಸಿದ್ದಾರೆ ಎನ್ನಲಾಗಿದೆ. ಆದರೆ ಆರೋಪಿಯನ್ನು ಈವರೆಗೆ ವಶಕ್ಕೆ ಪಡೆದಿಲ್ಲ ಎಂದು ಪೋಷಕರು ದೂರಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821