ವಿಶಾಖಪಟ್ಟಣ, ಜ 16 (DaijiworldNews/DB): ಪೊಲೀಸ್ ಠಾಣೆಯ ವಶದಲ್ಲಿದ್ದ ವಾಹನಗಳು ಬೆಂಕಿಗಾಹುತಿಯಾದ ಘಟನೆ ಕಾಂಚರಪಾಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
24 ಬೈಕ್, ಒಂದು ಆಟೋ ಮತ್ತು ಒಂದು ಕಾರು ಸುಟ್ಟು ಭಸ್ಮವಾಗಿದೆ. ಬೆಂಕಿ ಹತ್ತಿಕೊಳ್ಳಲು ಕಾರಣ ಗೊತ್ತಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ವಿಶಾಖಪಟ್ಟಣ ವಲಯ 2ರ ಡಿಸಿಪಿ ಆನಂದ್ ರೆಡ್ಡಿ ಹೇಳಿದ್ದಾರೆ.
ನ್ಯಾಯಾಲಯಗಳಲ್ಲಿ ವಿವಾದದಲ್ಲಿರುವ ವಾಹನಗಳು, ದಂಡ ಕಟ್ಟದೆ, ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಜಪ್ತಿ ಮಾಡಿದ ವಾಹನಗಳು ಮತ್ತು ವಾರಿಸುದಾರರಿಲ್ಲದ ವಾಹನಗಳು ಇವಾಗಿದ್ದು, ಈ ವಾಹನಗಳನ್ನು ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಲಾಗಿತ್ತು. ಆದರೆ ಏಕಾಏಕಿ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಎಲ್ಲಾ ವಾಹನಗಳು ಬೆಂಕಿಗಾಹುತಿಯಾಗಿವೆ.
ಅಗ್ನಿಶಾಮಕ ಸಿಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.