ನವದೆಹಲಿ, ಜ 17 ( DaijiworldNews/MS): ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆಯಡಿ, ಮಾಹಿತಿ ನೀಡುವಂತೆ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಟ್ರಸ್ಟ್ಗೆ ಸಂಬಂಧಿಸಿದ ಮಾಹಿತಿ ನೀಡುವಂತೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿಗೆ ಈ ಹಿಂದೆ ಸಿಐಸಿ ಆದೇಶ ನೀಡಿತ್ತು.
ಸುಪ್ರೀಂ ಕೋರ್ಟ್ 2019ರಲ್ಲಿ ನೀಡಿದ್ದ ಅಯೋಧ್ಯೆ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಥಾಪಿಸಿತ್ತು.
ಕೈಲಾಶ್ ಚಂದ್ರ ಮೂಂದ್ರಾ ಎಂಬುವವರಿಗೆ ಮಾಹಿತಿ ನಿರಾಕರಿಸಿದ್ದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ), ಮತ್ತು ಮೇಲ್ಮನವಿ ಪ್ರಾಧಿಕಾರವಾದ ಸಿಬಿಡಿಟಿಗಳ ಆದೇಶವನ್ನು ಸಿಐಸಿ ನವೆಂಬರ್ 30, 2022ರಂದು ರದ್ದುಗೊಳಿಸಿತ್ತು. ಸಿಐಸಿ ನಿರ್ದೇಶನಗಳನ್ನು ಪ್ರಶ್ನಿಸಿ ಸಿಪಿಐಒ, ಸಿಬಿಡಿಟಿ ನ್ಯಾಯಾಲಯದ ಮೊರೆ ಹೋಗಿದ್ದವು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಪ್ರತಿಬಾ ಎಂ ಸಿಂಗ್ ಅವರಿದ್ದ ಏಕಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿದೆ.
ಸಿಪಿಐಒ, ಸಿಬಿಡಿಟಿ ಮತ್ತು ಮೇಲ್ಮನವಿ ಪ್ರಾಧಿಕಾರದ ಆದೇಶಗಳನ್ನು ರದ್ದುಗೊಳಿಸಲು ಸಿಐಸಿ ತನ್ನ ಆದೇಶದಲ್ಲಿ ಯಾವುದೇ ಕಾರಣ ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ.ಪ್ರಕರಣದ ಮುಂದಿನ ವಿಚಾರಣೆ ಮೇ 23ರಂದು ನಡೆಯಲಿದೆ.