ಧಾರವಾಡ, ಫೆ 20 (DaijiworldNews/HR): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಇಬ್ಬರ ನಡುವಿನ ಮನಸ್ತಾಪ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಅಧಿಕಾರಿಗಳ ಕಿತ್ತಾಟದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, 'ಐಎಎಸ್, ಐಪಿಎಸ್ ಅಧಿಕಾರಿಗಳು ಈ ರೀತಿ ರಸ್ತೆಯಲ್ಲಿ ನಿಂತು ಸ್ಟೇಟ್ ಮೆಂಟ್ಸ್ ಕೊಡುವುದು, ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದು ಅನಾರೋಗ್ಯಕರ ಬೆಳವಣಿಗೆಯಾಗಿದೆ. ಅಧಿಕಾರಿಗಳ ಈ ರೀತಿಯ ವರ್ತನೆ ಸರಿಯಲ್ಲ. ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಅವರಲ್ಲಿ ಪರಸ್ಪರ ದೂರುಗಳಿದ್ದರೆ ಸಕ್ಷಮ ಪ್ರಾಧಿಕಾರಕ್ಕೆ ಕಳಿಸಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಹೇಳಿಕೆಗಳನ್ನು ಕೊಡುವುದು ಅನಾರೋಗ್ಯಕರ ಬೆಳವಣಿಗೆ. ನಾನು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈ ಬಗ್ಗೆ ಹೇಳುತ್ತೇನೆ. ಇವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.