ಕೊಪ್ಪಳ, ಫೆ 22 (DaijiworldNews/DB): ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯನವರು ಇಡೀ ವ್ಯವಸ್ಥೆಯನ್ನೇ ಹಾಳುಗೆಡಹುವ ಕೆಲಸ ಮಾಡಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಕೊಪ್ಪಳ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಲ್ಲಿ ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದರೆ ಸಿದ್ದರಾಮಯ್ಯನವರು ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಟಿಪ್ಪು ಜಯಂತಿ ಆಚರಣೆ ಮಾಡಿದರು. ಶಾಲೆಯ ಮಕ್ಕಳ ನಡುವೆಯೂ ಜಾತಿ ತಂದರು. ವೀರಶೈವ ಧರ್ಮವನ್ನೂ ಒಡೆಯಲು ಕಾರಣರಾದರು ಎಂದು ಆಪಾದಿಸಿದರು.
ಸಿದ್ದರಾಮಯ್ಯ ಸರ್ಕಾರವಿದ್ದಾಗ ಜೈಲಿನಲ್ಲಿದ್ದ ಪಿಎಫ್ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದರು. ಆದರೆ ನಮ್ಮ ಸರ್ಕಾರ ಆ ಸಂಘಟನೆಯನ್ನೇ ನಿಷೇಧಿಸಿದೆ. ಓಲೈಕೆ ರಾಜಕಾರಣ ಮಾಡುವುದು ಕಾಂಗ್ರೆಸ್ನವರೇ ಹೊರತು ನಾವಲ್ಲ ಎಂದರು.
ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಡುವೆ ಕಿತ್ತಾಟ ಸರಿಯಲ್ಲ ಎಂದು ಇದೇ ವೇಳೆ ಅವರು ತಿಳಿಸಿದರು.
ಅಭಿವೃದ್ದಿಯಾಗಬೇಕಾದರೆ ಡಬಲ್ ಎಂಜಿನ್ ಸರ್ಕಾರ ಬೇಕೆಂಬುದನ್ನು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತ ಪ್ರಬಲ ರಾಷ್ಟ್ರವಾಗಿ ಬೆಳೆದಿದೆ. ಅಭಿವೃದ್ದಿ ಗುರಿಯಿಟ್ಟು ಪ್ರಧಾನಿ ಮಾತನಾಡುತ್ತಾರೆಯೇ ಹೊರತು ಚುನಾವಣೆ ಬಗ್ಗೆ ಅವರು ಮಾತನಾಡುವುದಿಲ್ಲ ಎಂದರು.